ಮಕ್ಕಳಿಗೆ ಕಿವಿಮಾತು

kvn.2013
ಬಾಳಸಂಜೆಯಲಿ ನಿಂತಿಹೆನು ನಾನಿಂದು
ಮನಸಿಟ್ಟು ಕೇಳಿರಿ ಹೇಳುವೆನು ಮಾತೊಂದು

ಕೇಳುವುದು ಬಿಡುವುದು ನಿಮಗೆ ಬಿಟ್ಟಿದ್ದು
ಅಂತರಾಳದ ನುಡಿಗಳಿವು ಹೃದಯದಲ್ಲಿದ್ದದ್ದು

ಗೊತ್ತಿಹುದು ನನಗೆ ರುಚಿಸಲಾರದು ನಿಮಗೆ
ಸಂಬಂಧ ಉಳಿಸುವ ಕಳಕಳಿಯ ಮಾತು

ಗೊತ್ತಿಹುದು ನನಗೆ ಪ್ರಿಯವಹುದು ನಿಮಗೆ
ಸಂಬಂಧ ಕೆಡಿಸುವ ಬಣ್ಣ ಬಣ್ಣದ ಮಾತು

ಹುಳುಕು ಹುಡುಕುವರೆಲ್ಲೆಲ್ಲು ವಿಷವನೆ ಕಕ್ಕುವರು
ಒಳಿತು ಕಾಣುವರೆಲ್ಲೆಲ್ಲು ಅಮೃತವ ಸುರಿಸುವರು

ದಾರಿಯದು ಸರಿಯಿರಲಿ ಅನೃತವನಾಡದಿರಿ
ತಪ್ಪೊಪ್ಪಿ ಸರಿನಡೆವ ಮನ ನಿಮಗೆ ಇರಲಿ

ಗೌರವಿಸಿ ಹಿರಿಯರ ಕಟುಮಾತನಾಡದಿರಿ
ಅಸಹಾಯಕರ ಶಾಪ ತಂದೀತು ಪರಿತಾಪ

ದೇವರನು ಅರಸದಿರಿ ಗುಡಿಗೋಪುರಗಳಲ್ಲಿ
ದೇವನಿಹನಿಲ್ಲಿ ನಮ್ಮ ಹೃದಯಮಂದಿರದಲ್ಲಿ

ಇಟ್ಟಿಗೆ ಕಲ್ಲುಗಳ ಜೋಡಿಸಲು ಕಟ್ಟಡವು
ಹೃದಯಗಳ ಜೋಡಿಸಿರಿ ಆಗುವುದು ಮನೆಯು

ಮಕ್ಕಳೇ ನಾ ನಂಬಿದಾ ತತ್ವ ಪಾಲಿಸುವಿರಾ?
ಬಾಳ ಪಯಣದ ಕೊನೆಗದುವೆನಗೆ ಸಂಸ್ಕಾರ
-ಕ.ವೆಂ.ನಾಗರಾಜ್.

2 Comments

  1. ಒಳ್ಳೆಯ ಕಿವಿಮಾತು… ಎಲ್ಲರಿಗೂ ಅನ್ವಯಿಸುತ್ತದೆ

  2. ವಂದನೆಗಳು, ಪ್ರಮೋದರೇ.

Leave a Reply